*ಗೋಕಾಕ* – ಚಳಿಗಾಲದ ಅಧಿವೇಶನ ಮುಗಿಯುವದೊಳಗೆ ಬೆಳಗಾವಿ ಜಿಲ್ಲೆಯನ್ನು ವಿಂಗಡಿಸಿ, ಆಡಳಿತಾತ್ಮಕ ದೃಷ್ಟಿಯಿಂದ ಗೋಕಾಕ ಮತ್ತು ಚಿಕ್ಕೋಡಿ ಹೊಸ ಜಿಲ್ಲಾ ಕೇಂದ್ರಗಳನ್ನಾಗಿ ಮಾಡುವ ಕುರಿತು ನಿರ್ಣಯವನ್ನು ಕೈಕೊಳ್ಳುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಸರ್ಕಾರವನ್ನು ಒತ್ತಾಯಿಸಿದರು.
ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನದಲ್ಲಿ ಮಂಗಳವಾರದಂದು ನಡೆದ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಿನ್ನೆ ಸೋಮವಾರದಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿಯವರ ನೇತೃತ್ವದಲ್ಲಿ ಗೋಕಾಕ ಜಿಲ್ಲೆಯಾಗುವುದರ ಸಂಬಂಧ ಮಠಾಧೀಶರು ಮತ್ತು ಹೋರಾಟ ಸಮೀತಿಯ ಸದಸ್ಯರ ನಿಯೋಗವು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿಯನ್ನು ಸಲ್ಲಿಸಲಾಗಿದೆ ಎಂದರು.
ಜಿಲ್ಲೆಗಳ ಪುನರ್ವಿಂಗಡಣೆ ಸಂಬಂಧವಾಗಿ ಆಗಿನ ಸರ್ಕಾರಗಳು ರಚಿಸಿದ್ದ ಎಲ್ಲ ಆಯೋಗಗಳು ಗೋಕಾಕ ಮತ್ತು ಚಿಕ್ಕೋಡಿ ಜಿಲ್ಲಾ ಕೇಂದ್ರವಾಗಲು ಯೋಗ್ಯ ಇವೆ. ಆಡಳಿತಾತ್ಮಕ ದೃಷ್ಟಿಯಿಂದ ಹೊಸ ಜಿಲ್ಲೆಗಳು ತಲೆ ಎತ್ತಬೇಕು ಎಂಬ ವರದಿಗಳನ್ನು ಆಗ ಅಸ್ತಿತ್ವದಲ್ಲಿದ್ದ ಸರ್ಕಾರಗಳಿಗೆ ಶಿಫಾರಸ್ಸು ಮಾಡಿ ತಮ್ಮ ವರದಿಗಳನ್ನು ಸಲ್ಲಿಕೆ ಮಾಡಿದ್ದವು. ನಮ್ಮ ಮನವಿಗೆ ಪೂರಕವಾಗಿ ಸ್ಪಂದಿಸಿರುವ ಮುಖ್ಯಮಂತ್ರಿಗಳು ಜಿಲ್ಲೆಯ ಎಲ್ಲ 18 ಶಾಸಕರು ಮತ್ತು ಮೂವರು ವಿಧಾನ ಪರಿಷತ್ ಸದಸ್ಯರ ಸಭೆಯನ್ನು ಕರೆದು ನಿರ್ಣಯ ಮಾಡುವುದಾಗಿ ಹೇಳಿದ್ದಾರೆ. ವಿಧಾನ ಮಂಡಲ ಅಧಿವೇಶನ ಮುಗಿಯುವದೊಳಗಾಗಿ ಜಿಲ್ಲಾ ರಚನೆಯ ಸಂಬಂಧ ಸ್ಪಷ್ಟ ನಿರ್ಣಯವನ್ನು ತೆಗೆದುಕೊಳ್ಳಬೇಕು. ಜಿಲ್ಲಾ ರಚನೆಗಾಗಿ ಕಳೆದ 40 ವರ್ಷಗಳಿಂದ ಹೋರಾಟವನ್ನು ಮಾಡಿಕೊಂಡು ಬರಲಾಗುತ್ತಿದೆ. ಆದ್ದರಿಂದ ಜಿಲ್ಲೆಯ ಎಲ್ಲ ಶಾಸಕರುಗಳ ಸಭೆಯನ್ನು ಕರೆದು ಅಂತಿಮ ನಿರ್ಣಯವನ್ನು ಮಾಡುವಂತೆ ಸಭಾಧ್ಯಕ್ಷರ ಮೂಲಕ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಮುಖ್ಯಮಂತ್ರಿಗಳನ್ನು ಮತ್ತೊಮ್ಮೆ ಆಗ್ರಹಿಸಿದರು.
IN MUDALGI Latest Kannada News